ಕೊಪ್ಪಳ : ರಾಷ್ಟ್ರೀಯ ಹೆದ್ದಾರಿ–50ರಲ್ಲಿ ಲಿಂಗಾಪುರ ಸಮೀಪ ಐಆರ್ಬಿ ಮುಂದೆ ಕಾರೊಂದು ಹಿಂದಿನಿಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಜರುಗಿದೆ.
ತಮಿಳುನಾಡಿನ ಅಂಬೂರಿನಿಂದ ಕಲಬುರಗಿ ಕಡೆಗೆ ತೆರಳುತ್ತಿದ್ದ ಕಾರು ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ನಿಜಾಮುದ್ದೀನ್ (40) ಸ್ಥಳದಲ್ಲೇ ಮೃತಪಟ್ಟಿದ್ದು, ಇಮ್ರಾಜ್, ನಜೀರ್ ಅಹ್ಮದ್, ಹೊಹೆಲ್ ಅಹ್ಮದ್ ಎಂಬ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರು ಬೆಂಗಳೂರು ಮೂಲದವರು ಎಂದು ಹೇಳಲಾಗುತ್ತಿದೆ.
ಗಾಯಾಳುಗಳಿಗೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ ನೀಡಿದ್ದು ಮುನಿರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.